ತಾಳ್ಮೆ ಇರಲಿ ಎಲ್ಲರಿಗೂ ಅವಕಾಶ ಸಿಗಲಿದೆ: ಡಿಕೆಶಿ

ಬೆಂಗಳೂರು, ಆ.3: ಸಚಿವ ಸಂಪುಟದಲ್ಲಿ ಕೇವಲ 33 ಮಂದಿಗೆ ಮಾತ್ರ ಅವಕಾಶವಿದ್ದು, ಕಾಂಗ್ರೆಸ್‌ನ ಎಲ್ಲಾ 133 ಶಾಸಕರೂ ಸಚಿವರಾಗುವ ಅರ್ಹತೆ ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಪಕ್ಷದ ಹೈಕಮಾಂಡ್ ಎಲ್ಲ ಆಯಾಮಗಳನ್ನು ಪರಿಗಣಿಸಿ ಅಂತಿಮ ತೀರ್ಮಾನ ಕೈಗೊಂಡಿದ್ದು, ಅವಕಾಶ ಸಿಗದವರಲ್ಲಿ ಅಸಮಾಧಾನ ಸಹಜ. ಆದರೆ ತಾಳ್ಮೆಯಿಂದ ಕಾಯುವವರಿಗೆ ಮುಂದಿನ ದಿನಗಳಲ್ಲಿ ಅವಕಾಶ ದೊರೆಯಲಿದೆ ಎಂದು ಅವರು ಭರವಸೆ ನೀಡಿದರು.

ಸಚಿವ ಸಂಪುಟ ವಿಸ್ತರಣೆಯ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಹೊಸ ಮುಖಗಳಿಗೆ ಆದ್ಯತೆ ನೀಡುವ ಉದ್ದೇಶದಿಂದ 19 ಹೊಸ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ ಎಂದರು. ಹಿಂದಿನ ಸರ್ಕಾರಗಳ ಅವಧಿಯಲ್ಲಿಯೂ ಹಲವು ಹಿರಿಯ ನಾಯಕರಿಗೆ ಆರಂಭದಲ್ಲೇ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಸ್ವತಃ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ನಾಯಕರು ತಾಳ್ಮೆಯಿಂದ ಅವಕಾಶಕ್ಕಾಗಿ ಕಾಯಬೇಕಾದ ಸಂದರ್ಭಗಳು ಇದ್ದವು ಎಂದು ನೆನಪಿಸಿದರು.

ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ವಿಶ್ರಾಂತಿಯ ಅವಕಾಶವೇ ಇಲ್ಲ ಎಂದು ತಿಳಿಸಿದ ಸಿಎಂ, ಬೆಂಗಳೂರಿನ ಕೆಲಸಗಳನ್ನು ಮುಗಿಸಿಕೊಳ್ಳಲು ಕೇವಲ ಒಂದು ದಿನದ ಸಮಯ ನೀಡಲಾಗಿದೆ. ಅದರ ಬಳಿಕ ತಮ್ಮ ಜವಾಬ್ದಾರಿಯ ಜಿಲ್ಲೆಗಳಿಗೆ ತೆರಳಿ ಬರ, ಅತಿವೃಷ್ಟಿ, ಪ್ರವಾಹ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಶೀಲನೆ ನಡೆಸಬೇಕು. ವಾಸ್ತವ ಸ್ಥಿತಿಯ ಸಮಗ್ರ ವರದಿಯನ್ನು ಕಂದಾಯ ಸಚಿವರಿಗೆ ಸಲ್ಲಿಸುವಂತೆ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮಾಣವಚನ ಸಮಾರಂಭದಲ್ಲಿ ಗೈರಾಗಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಅವರಿಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು. ಜನ್ಮದಿನದ ಕಾರಣ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ. ಸಚಿವ ಸಂಪುಟದ ಬಗ್ಗೆ ಹಲವು ಬಾರಿ ಅವರೊಂದಿಗೆ ಚರ್ಚೆ ನಡೆಸಿದ್ದು, ನಾವು ಒಂದೇ ತಂಡವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸಚಿವರ ಪಟ್ಟಿಗಳು ಅಧಿಕೃತವಲ್ಲ. ರಾಜ್ಯಪಾಲರಿಗೆ ಸಲ್ಲಿಸಿದ ಪಟ್ಟಿಯೇ ಅಂತಿಮವಾಗಿದ್ದು, ಹೈಕಮಾಂಡ್ ಮಾರ್ಗದರ್ಶನದಂತೆ ಸಂಪುಟ ರಚಿಸಲಾಗಿದೆ ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾತನಾಡಿ, ರಾಜ್ಯದ 111 ತಾಲೂಕುಗಳಲ್ಲಿ ಇನ್ನೂ ಬರದ ಛಾಯೆ ಮುಂದುವರಿದಿದೆ ಎಂದರು. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ನಾಲ್ಕು ವಾರಗಳಿಂದ ಸಮರ್ಪಕ ಮಳೆಯಾಗಿಲ್ಲ. ಮತ್ತೊಂದೆಡೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು, ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ತಮಿಳುನಾಡಿನ ನೀರಿನ ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-08-04 12:42:59
No Reviews