ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ... ಏನೆಲ್ಲಾ ನಡೆಯಿತು?

ನವದೆಹಲಿ: 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಕೊನೆಗೂ ಗುರುವಾರ ರಾತ್ರಿ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದರು. ಜೂನ್ 28ರಿಂದ ಆರಂಭವಾಗಿದ್ದ ಈ ಹೋರಾಟವು ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕೊನೆಗೆ ಕೇಂದ್ರ ಸರ್ಕಾರದ ಸಂಧಾನ ಯಶಸ್ವಿಯಾಗಿದ್ದು, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಡಾ. ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ವಾಂಗ್ಚುಕ್ ಉಪವಾಸ ಮುಗಿಸಿದರು.

ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ನಡೆದ ಮಾತುಕತೆಯ ಬಳಿಕ ಕೇಂದ್ರ ಸರ್ಕಾರವು ವಾಂಗ್ಚುಕ್ ಮತ್ತು ಪ್ರತಿಭಟನಾನಿರತ ವಿದ್ಯಾರ್ಥಿಗಳು ಮುಂದಿಟ್ಟ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕವಾಗಿ ಕ್ರಮ ಕೈಗೊಳ್ಳುವುದಾಗಿ ಲಿಖಿತ ಭರವಸೆ ನೀಡಿತು. ಇದೇ ಭರವಸೆಯ ಮೇರೆಗೆ ವಾಂಗ್ಚುಕ್ ತಮ್ಮ ಉಪವಾಸ ಸತ್ಯಾಗ್ರಹಕ್ಕೆ ತೆರೆ ಎಳೆದರು.

ಇದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಪ್ರಧಾನಿ ಕಚೇರಿಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರೊಂದಿಗೆ ಸುಮಾರು ನಾಲ್ಕು ಗಂಟೆಗಳ ಕಾಲ ಮಹತ್ವದ ಸಭೆ ನಡೆಸಿದ್ದರು. ಸಭೆಯಲ್ಲಿ ವಾಂಗ್ಚುಕ್ ಅವರ ಆರೋಗ್ಯಕ್ಕೆ ಆದ್ಯತೆ ನೀಡುವ ಜೊತೆಗೆ ಅವರು ಎತ್ತಿರುವ ಬೇಡಿಕೆಗಳ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು.

ಕೇಂದ್ರದ ಸೂಚನೆಯಂತೆ ಡಾ. ಜಿತೇಂದ್ರ ಸಿಂಗ್ ಅವರು ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೋ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸರ್ಕಾರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಬದ್ಧವಾಗಿದೆ ಎಂದು ಭರವಸೆ ನೀಡಿದರು. ಬಳಿಕ ಅವರು ವಾಂಗ್ಚುಕ್ ಅವರನ್ನು ಉಪವಾಸ ಅಂತ್ಯಗೊಳಿಸುವಂತೆ ಮನವೊಲಿಸಿದರು.

ಸರ್ಕಾರದ ಭರವಸೆ ಪತ್ರವನ್ನು ಆಸ್ಪತ್ರೆಯಲ್ಲೇ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ ವಾಂಗ್ಚುಕ್ ಅವರಿಗೆ ಹಸ್ತಾಂತರಿಸಿದರು. ಅದರಂತೆ, ಪ್ರತಿಭಟನಾ ನಿರತ ಸಿಜೆಪಿ (CJP) ನಿಯೋಗದೊಂದಿಗೆ ಶೀಘ್ರದಲ್ಲೇ ಅಧಿಕೃತ ಮಾತುಕತೆ ನಡೆಸಲು ಸರ್ಕಾರ ಒಪ್ಪಿದೆ. ಆದರೆ ಜಂತರ್ ಮಂತರ್‌ನಲ್ಲಿ ಅಥವಾ ಸರ್ಕಾರ ಸೂಚಿಸುವ ತಟಸ್ಥ ಸ್ಥಳದಲ್ಲೇ ಮಾತುಕತೆ ನಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಸರ್ಕಾರ ನೀಡಿರುವ ಪ್ರಮುಖ ಭರವಸೆಗಳಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ವ್ಯವಸ್ಥೆಯ ಸುಧಾರಣೆ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವುದು, ವಿದ್ಯಾರ್ಥಿಗಳ ಬೇಡಿಕೆಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದು, ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸದಿರುವುದು ಸೇರಿವೆ.

ಈ ಬೆಳವಣಿಗೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡು, “ಸೋನಮ್ ಜಿ ಅವರು ವೈದ್ಯರ ಸಲಹೆ ಪಾಲಿಸಿ ಶೀಘ್ರ ಗುಣಮುಖರಾಗಲಿ. ಅವರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಶುಭ ಹಾರೈಸಿದರು.

ಉಪವಾಸ ಅಂತ್ಯಗೊಳಿಸಿದ ಬಳಿಕ ಸೋನಮ್ ವಾಂಗ್ಚುಕ್ ಅವರು ಲಡಾಖ್‌ಗೆ ತೆರಳುವ ಇಚ್ಛೆ ವ್ಯಕ್ತಪಡಿಸಿದ್ದು, ಅದಕ್ಕೂ ಮೊದಲು ತಮ್ಮ ಹೋರಾಟಕ್ಕೆ ಬೆಂಬಲ ನೀಡಿದ ವಿದ್ಯಾರ್ಥಿಗಳು ಹಾಗೂ ಬೆಂಬಲಿಗರೊಂದಿಗೆ ಸಂವಾದ ನಡೆಸುವುದಾಗಿ ತಿಳಿಸಿದ್ದಾರೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-07-24 11:23:41
No Reviews